ಸೋಮವಾರ, ಜನವರಿ 10, 2011

ಜಾಗರದ ಕೊನೆಗೆ

ರಾತ್ರಿ ಪಾಳಿ ಮುಗಿಸಿದ ದಾದಿ
ಬಸ್ಟಾಪಿನಲ್ಲಿದ್ದಾಳೆ. ಆಗಷ್ಟೇ ಊದಿನ ಕಡ್ಡಿ
ಹಚ್ಚಿಕೊಂಡ ರಿಕ್ಷಾ ಹಾಲಿನ ವ್ಯಾನು ಹಾದಿವೆ
ಎಮರ್ಜೆನ್ಸಿಗೆಂದು ಪಜಾಮದಲ್ಲೇ ಬಂದಿದ್ದ ಡಾಕ್ಟ್ರು
ಗೇಟಿನ ಬಳಿ ಹಾರ್ನು ಬಾರಿಸಿ ಹೊರಟಿದ್ದಾರೆ
ಕನಸಿನ ಸುರಂಗಗಳಲ್ಲೂ ಓಡಿ ಓಡಿ ದಣಿದವರು
ರಸ್ತೆ ಬದಿ ಮೆಲ್ಲಗೆ ವಿಗ್ರಹಗಳಂತೆ ಏಳುತ್ತಿದ್ದಾರೆ

ಟಿಫಿನ್ ಕ್ಯಾರಿಯರ್ ಗಳು ಹೂವಿನ ಅಂಗಡಿಗಳನ್ನು
ಹಲೋ ಅಂದಿವೆ. ಸೈಕಲ್ ಬೆಲ್ ಗಳು ಕೊಳದೊಳಗಿನ
ಪ್ಲಾಸ್ಟಿಕ್ ಕಮಲಗಳನ್ನು ಕರೀತಿವೆ.
ಸಿಪ್ಪೆಯನ್ನು ಕಿತ್ತಳೆಯೆಂದು ತಿಳಿದು
ಮೋಸ ಹೋಗಿದ್ದಾನೆ ಊದ್ದ ಕಸಬರಿಗೆಯ ವಾರ್ಡ್ ಬಾಯ್.
ಮಚ್ಚರದಾನಿಗೆಂದು ಯಾರೋ ರಾತ್ರಿ
ಆಕಾಶಕ್ಕೆ ಹೊಡೆದ ಮೊಳೆಗಳು ಹಾಗೇ ಇವೆ

ರೆಕ್ಕೆಗಳ ಫಡಫಡಿಸಿ ಮರ
ಕತ್ತಲ ಕೊಡವಿಕೊಳ್ಳುತ್ತಿದೆ

ಎಲ್ಲ ಆಸ್ಪತ್ರೆಗಳ ಬಾಗಿಲು ತೆರೆಯಲಿ
ಜ್ವರದ ಕಣ್ಣಿನ ಮಕ್ಕಳು ನನ್ನ ಮಡಿಲಿಗೆ ಬರಲಿ
ಕಿರಣ ಸೋಕಿದರೆ ಸಾಕು ಮಾಯಲಿ ಗಾಯ
ಒಡೆಯದಿರಲಿ ಕಂಬನಿಗೆ ಎದೆಯ ಹಾಲು

                                        - ಜಯಂತ ಕಾಯ್ಕಿಣಿ

ಕಾಮೆಂಟ್‌ಗಳಿಲ್ಲ: